
ಹೊಸನಗರ : ತಾಲೂಕು ಆರ್ಯ ಈಡಿಗ ನೌಕರರ ಕ್ರಿಯಾ ವೇದಿಕೆಯ 19ನೇ ವರ್ಷದ ವಾರ್ಷಿಕ ಮಹೋತ್ಸವ, ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತರಿಗೆ ಸನ್ಮಾನ ಕಾರ್ಯಕ್ರಮವು ಪಟ್ಟಣದ ಈಡಿಗ ಸಭಾಭವನದಲ್ಲಿ ನಡೆಯಿತು. ಕ್ರಿಯಾ ವೇದಿಕೆಯ ಅಧ್ಯಕ್ಷ ಕೆ.ಜಿ. ಪುಟ್ಟಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.
ನಿಟ್ಟೂರು ಅಮೃತ ಬ್ರಹ್ಮಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಮಹಾಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮವನ್ನು ಸಾಗರ–ಹೊಸನಗರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಲೂರು ಗೋಪಾಲಕೃಷ್ಣ ಉದ್ಘಾಟಿಸಿ ಮಾತನಾಡಿದರು. ಸಮಾಜದ ಉನ್ನತಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಸಮಾಜದ ಋಣ ತೀರಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಪೋಷಕರು ಮಕ್ಕಳನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸುವತ್ತ ಹೆಚ್ಚು ಗಮನ ಹರಿಸಬೇಕು. ಯಾರೂ ಅಪಹರಿಸಲಾಗದ ಶಿಕ್ಷಣವೆಂಬ ಅಮೂಲ್ಯ ಸಂಪತ್ತನ್ನು ಮಕ್ಕಳಿಗೆ ನೀಡಬೇಕು. ಜೊತೆಗೆ ಸಮಾಜದಲ್ಲಿನ ಅಶಕ್ತರನ್ನು ಪೋಷಿಸುವ ಕಾರ್ಯದಲ್ಲೂ ಎಲ್ಲರೂ ಭಾಗಿಯಾಗಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಬಂಡಿ ರಾಮಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್, ತಾಲೂಕು ಪಂಚಾಯತ್ ಪಿಎಂ ಪೋಷಣ್ ಸಹಾಯಕ ನಿರ್ದೇಶಕ ಶೇಷಾಚಲ ಜಿ. ನಾಯಕ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಸಾಗರ ತಾಲೂಕಿನ ಆನಂದಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರವಿಶಂಕರ್ ಅವರು ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಮನೋಸ್ಥಿತಿಯ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.
ಕ್ರಿಯಾ ವೇದಿಕೆ ಕಾರ್ಯದರ್ಶಿ ಎರೇಬೀಸು ಸ್ವಾಗತಿಸಿದರು. ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು. ಕರಿಗೆರೆಸು ರಾಘವೇಂದ್ರ ವಂದಿಸಿದರು.
ವರದಿ : ಕೆರೆಹಳ್ಳಿ ಅಂಜನ್