
ಬಿಡದಿ : ಪ್ರದೇಶದಲ್ಲಿ ಗ್ಯಾಸ್ ಸಿಲಿಂಡರ್ಗಳ ಕೊರತೆ ಹೆಚ್ಚುತ್ತಿರುವ ನಡುವೆಯೇ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದೇ ಹಿನ್ನಲೆಯಲ್ಲಿ ಗ್ಯಾಸ್ ಸಿಲಿಂಡರ್ ಕಳವು ಪ್ರಕರಣವನ್ನು ಬಿಡದಿ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯ ಬನ್ನಿಕುಪ್ಪೆ ಗ್ರಾಮದ ಮನೆಯೊಂದರ ಮುಂಭಾಗದಲ್ಲಿ ನಿಲ್ಲಿಸಿದ್ದ ವಾಹನದಲ್ಲಿದ್ದ 8 ಗ್ಯಾಸ್ ಸಿಲಿಂಡರ್ಗಳನ್ನು ಕಳ್ಳರು ಕಳವು ಮಾಡಿರುವ ಕುರಿತು ದೂರು ದಾಖಲಾಗಿತ್ತು. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಯಿತು.
ತನಿಖೆ ವೇಳೆ ಪೊಲೀಸರು ಶಂಕಿತ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅವರೇ ಕಳವು ನಡೆಸಿರುವುದು ಬಹಿರಂಗವಾಯಿತು. ಬಂಧಿತರಿಂದ ಸುಮಾರು ₹58 ಸಾವಿರ ಮೌಲ್ಯದ 8 ಗ್ಯಾಸ್ ಸಿಲಿಂಡರ್ಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನವನ್ನು ಜಪ್ತಿ ಮಾಡಲಾಗಿದೆ.
ಈ ಪ್ರಕರಣವನ್ನು ಶೀಘ್ರವಾಗಿ ಪತ್ತೆಹಚ್ಚುವಲ್ಲಿ ಬಿಡದಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ.
ಗ್ಯಾಸ್ ಕೊರತೆಯೇ ಕಾರಣ?
ಪ್ರದೇಶದಲ್ಲಿ ಗ್ಯಾಸ್ ಸಿಲಿಂಡರ್ಗಳ ಕೊರತೆ ಮತ್ತು ಹೆಚ್ಚುತ್ತಿರುವ ಬೇಡಿಕೆ ಕಳ್ಳತನಕ್ಕೆ ದಾರಿ ಮಾಡಿಕೊಡುತ್ತಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಹೆಚ್ಚಿನ ನಿಗಾವಹಿಸಿದ್ದಾರೆ.
ವರದಿ : ಗಣೇಶ್ ರಿಪ್ಪನ್ ಪೇಟೆ