
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಹಳೆ ಅಂಚೆ ಕಚೇರಿ ಸಮೀಪ ನಡೆದ ನಕಲಿ ಬಂಗಾರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.
ಬಸಮ್ಮ ಎಂಬ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ, ಅಪರಿಚಿತ ಮಹಿಳೆ ಹಾಗೂ ವ್ಯಕ್ತಿಯೊಬ್ಬರು ಪರಿಚಯ ಮಾಡಿಕೊಂಡು, ಚಿನ್ನದಂತೆ ಕಾಣುವ ಸರವನ್ನು ತೋರಿಸಿ “ಇದು 6 ಪವನು ಚಿನ್ನದ ಸರ, ತುರ್ತು ಹಣದ ಅವಶ್ಯಕತೆ ಇದೆ” ಎಂದು ನಂಬಿಸಿದ್ದರು. ಇದರಿಂದ ಮೋಸಗೊಂಡ ಬಸಮ್ಮ ಅವರು ಸುಮಾರು 2 ಗ್ರಾಂ ತೂಕದ ಅಂದಾಜು ₹1.50 ಲಕ್ಷ ಮೌಲ್ಯದ ಬಂಗಾರದ ಒಡವೆಗಳು ಹಾಗೂ ₹6,000 ನಗದು ನೀಡಿ ಸರವನ್ನು ಪಡೆದುಕೊಂಡಿದ್ದರು.
ನಂತರ ಸರವನ್ನು ಪರಿಶೀಲಿಸಲು ಹತ್ತಿರದ ಚಿನ್ನದ ಅಂಗಡಿಗೆ ಹೋದಾಗ ಅದು ನಕಲಿ ಎಂಬುದು ಬೆಳಕಿಗೆ ಬಂದಿದೆ. ತಕ್ಷಣ ಹಿಂದಿರುಗಿ ನೋಡಿದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿರುವುದು ಕಂಡುಬಂದಿದ್ದು, ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನಿಖೆ ನಡೆಸಿದ ಪೊಲೀಸರಿಗೆ ತುಮಕೂರು ಜಿಲ್ಲೆಯ ಬೆಳ್ಳಾವಿ ಹೋಬಳಿ ಬಲ್ಲಾಪುರ ಬುಡುಗನಹಳ್ಳಿ ನಿವಾಸಿ ಕಾವ್ಯ ಹಾಗೂ ದಾವಣಗೆರೆ ಜಿಲ್ಲೆಯ ಸಂತೆಬೆನ್ನೂರು ತಾಲೂಕಿನ ವೆಂಕಟೇಶ್ ಆರೋಪಿಗಳೆಂದು ಪತ್ತೆಯಾಗಿದೆ. ಈ ಹಿನ್ನೆಲೆ ಕಾವ್ಯಳನ್ನು ಬಂಧಿಸಲಾಗಿದ್ದು, ಆಕೆಯಿಂದ ₹75,000 ಮೌಲ್ಯದ 7.610 ಗ್ರಾಂ ಚಿನ್ನಾಭರಣ ಹಾಗೂ ₹6,000 ನಗದು ವಶಪಡಿಸಿಕೊಳ್ಳಲಾಗಿದೆ.
ವರದಿ : ಗಣೇಶ್ ರಿಪ್ಪನ್ ಪೇಟೆ